ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಅನಗತ್ಯ ಆರೋಪ ಮಾಡಿ ರಾಜ್ಯದ ಜನತೆಗೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಹೊರಟಿದ್ದು, ಇದಕ್ಕೆ ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ, ಯಾವುದೇ ರೀತಿಯ ಕಾನೂನು ಬಾಹಿರವಾಗಿ ನಡೆಯದೇ ಇರುವ ಪ್ರಕರಣವನ್ನು ಜನರಿಗೆ ಪಾದಯಾತ್ರೆ ಮಾಡುವ ಮೂಲಕ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ. ಕಾಂಗ್ರೆಸ್ ಈ ಹಿಂದೆ ನಡೆಸಿದ್ದ ಪಾದಯಾತ್ರೆಯಲ್ಲಿ ನಿಜಾಂಶ ಇತ್ತು, ರಾಜ್ಯದ ಸಂಪತ್ತನ್ನು ಲೂಟಿ ಮಾಡುವವರ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ನಿಂದ ಪಾದಯಾತ್ರೆ ನಡೆಸಲಾಗಿತ್ತು.ಆದರೆ ಈ ಪಾದಯಾತ್ರೆ ಅನವಶ್ಯಕ ಎಂದು ಹೇಳಿದರು.
ಮೈಸೂರಿನ ಮೂಡಾ ಪ್ರಕರಣ ಬಗ್ಗೆ ಸರಿಯಾದ ತನಿಖೆ ನಡೆಸಲು ಈಗಾಗಲೇ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರವನ್ನು ನಾವು ಸಮರ್ಥಿಸಿಕೊಳ್ಳುವ ಮಾತೇ ಇಲ್ಲ ಎರಡು ಪ್ರಕರಣಗಳ ವರದಿ ಬಂದ ನಂತರ ಜನರಿಗೆ ತಿಳಿಯುತ್ತದೆ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.